February 4, 2026
3-mng-415x249-1 (1)

ಮಂಗಳೂರು: ರೌಡಿಶೀಟರ್, ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿದ್ದು ನಗರದಲ್ಲಿ ಬಹುತೇಕ ಅಂಗಡಿಗಳು ಮುಚ್ಚಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ.

ಬೆಂಗಳೂರಿನಿಂದ ಬಂದ ನಾಲ್ಕು ಬಸ್‌ಗಳಿಗೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೆ ಕೆಎಸ್ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಪಂಪ್‌ವೆಲ್‌ ಬಳಿ ನಾಲ್ಕು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್‌ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದರು.

ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.

ಬಹುತೇಕ‌ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.