ಮಂಗಳೂರು : ಕಾಂಗ್ರೆಸ್ ಪಕ್ಷ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರಲು, ಸಿಎಂ ಸಿದ್ದರಾಮಯ್ಯ ಅವರ ಹೆಸರು ಕೆಡಿಸಿ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಮುಡಾ ವಿಚಾರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾಯಿತ ಸರಕಾರವನ್ನು ಕೆಡವಿ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆಬತರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದರು.
ರಾಜ್ಯಪಾಲರು ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ, ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಲಂಚ ಪಡೆದಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು, ಬಿಜೆಪಿಯಲ್ಲಿ ಸಿಎಂ ಹುದ್ದೆ ಪಡೆಯಲು ಹೈಕಮಾಂಡ್ಗೆ ಎರಡೂವರೆ ಸಾವಿರ ಕೋಟಿ ರೂಪಾಯಿ ಕೊಡಬೇಕು ಎಂದು ಬಸನಗೌಡ ಯತ್ನಾಳ್ ಹೇಳಿದ್ದರು, ಸಂತೋಷ್ ಹೆಗಡೆ ವರದಿಯಲ್ಲಿ ಆರೋಪಿಗಳಾಗಿದ್ದವರು, ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವರೆಲ್ಲ ಸೇರಿ ಈಗ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ರಮಾನಾಥ ರೈ ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಜಿ ಹೆಗಡೆ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆ.ಅಶ್ರಫ್, ಹರಿನಾಥ್, ಪಾಲಿಕೆ ಸದಸ್ಯ ನವೀನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ ಸೇರಿ ಇತರರು ಉಪಸ್ಥಿತರಿದ್ದರು.
