February 4, 2026
G_Parameshwara

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಪೊಲೀಸರಿಗೆ ಖಡಕ್ ಸೂಚನೆಯನ್ನೂ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸಂಭವಿಸಿದ ಘಟನೆ ತಲೆತಗ್ಗಿಸುವಂತಹದ್ದು. ಘಟನೆ ಸಂಬಂಧ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಭೆ ಕರೆದಿದ್ದೇನೆ, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ, ಸ್ವಂತಿಕೆ ಪ್ರದರ್ಶಿಸಲಿಲ್ಲ. ಸರಿಯಾಗಿ ನಡೆದುಕೊಳ್ಳಲಿಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ. ಪೊಲೀಸರು ಎಲ್ಲೋ ಮೂಲೆಯಲ್ಲಿ ನಿಂತು ದಿಢೀರ್ ಆಗಿ ಎದುರು ಬಂದು ತಡೆಯುತ್ತಾರೆ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಪರಮೇಶ್ವರ್ ಖಡಕ್ ಸೂಚನೆ ನೀಡಿದರು.

ಸ್ಪೀಡಾಗಿ ಬರುವ ಬೈಕ್​ ಸವಾರರನ್ನು ಪೊಲೀಸರು ದಿಢೀರಾಗಿ ಎದುರು ಬಂದು ತಡೆಯುತ್ತಾರೆ. ಇದರಿಂದ ಸವಾರರು ವಿಚಲಿತರಾಗುತ್ತಾರೆ. ಈ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ಸರಿಯಾದ ಸೂಚನೆ ಕೊಡುತ್ತೇವೆ ಎಂದು ಅವರು ಹೇಳಿದರು.